Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆವಿಜಿ ಪ್ರಿನ್ಸಿಪಾಲ್ ಎ ಎಸ್‌ ರಾಮಕೃಷ್ಣ ಕೊಲೆ ಪ್ರಕರಣ – ಸಹೋದರ ಡಾ. ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿ ದೋಷಿ

ಬೆಂಗಳೂರ: ಎರಡು ದಶಕಗಳ ಹಿಂದೆ ಕರಾವಳಿಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ ಎಸ್‌ ರಾಮಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪನ್ನು ನೀಡಿದ್ದು, ಮೃತರ ಸಹೋದರ ಡಾ.ರೇಣುಕಾ ಪ್ರಸಾದ್‌ ಸೇರಿದಂತೆ ಆರು ಮಂದಿಯನ್ನು ದೋಷಿಗಳು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

2011ರ ಏಪ್ರಿಲ್‌ 28ರಂದು ಬೆಥಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್‌ ಥೆರಪಿ ಕ್ಲಿನಿಕ್‌ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಮೃತನ ಸಹೋದರ ರೇಣುಕಾ ಪ್ರಸಾದ್‌ ಮೊದಲ

ಆರೋಪಿಯಾಗಿದ್ದು ಒಟ್ಟು ಏಳು ಆರೋಪಿಗಳಿದ್ದರು. ಸಾಕ್ಷ್ಯಧಾರಗಳ ಕೊರತೆಯಿಂದ ಅವರೆಲ್ಲರನ್ನೂ ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು 2016ರ ಅಕ್ಟೋಬರ್‌ 21ರಂದು ಆದೇಶಿಸಿತ್ತು.

ಈ ಆದೇಶ ಪ್ರಶ್ನಿಸಿ ಸರ್ಕಾರ 2017ರಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿತ್ತು. ಇದೀಗ ರೇಣುಕಾಪ್ರಸಾದ್‌ ಹಾಗೂ ಇತರೆ ಐವರು ಆರೊಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್‌, ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚಿನ ಕೃತ್ಯದಲ್ಲಿ ದೋಷಿ ಎಂದು ತೀರ್ಮಾನಿಸಿದೆ.

ಪ್ರಕರಣದ ಒಟ್ಟು ಏಳು ಮಂದಿ ಆರೋಪಿಗಳ ಪೈಕಿ ಡಾ. ರೇಣುಕಾ ಪ್ರಸಾದ್‌, ಮನೋಜ್‌ ರೈ, ಎಚ್‌ ಆರ್ ನಾಗೇಶ್‌, ವಾಮನ ಪೂಜಾರಿ, ಶರಣ್‌ ಪೂಜಾರಿ ಮತ್ತು ಶಂಕರ ಅವರನ್ನು ಮೃತ ಎ ಎಸ್‌ ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳು ಎಂದು ತೀರ್ಮಾನಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್‌ ಯು ನಾಗೇಶ್‌ ಕುಮಾರ್‌ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಇದೇ ವೇಳೆ ಮಾನ್ಯ ಮಾಡಿದೆ.
ಅಲ್ಲದೆ, ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅಕ್ಟೋಬರ್‌ 5ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.