Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ನನ್ನ ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದ ಪಾಕ್

ನವದೆಹಲಿ: 2008ರ ನವೆಂಬರ್‌ 26ರಂದು ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್‌ ಮೈಂಡ್‌, ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಸಂಸ್ಥಾಪಕ ಹಫೀಜ್‌ ಸಯೀದ್‌ನನ್ನ ಹಸ್ತಾಂತರಿಸಬೇಕು ಎಂದು ಭಾರತ ಕೇಳಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರೆ ಮುಮ್ತಾಜ್ ಝಹ್ರಾ ಬಲೂಚ್ ಅವರು, ಹಫೀಜ್ ಸಯೀದ್ ಹಸ್ತಾಂತರಕ್ಕೆ ಭಾರತದ ಮನವಿ ಬಂದಿದೆ. ಆದರೆ, ಹಸ್ತಾಂತರಿಸಲು ಸಾಧ್ಯವಿಲ್ಲ, ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ.

ಹಫೀಜ್‌ ಸಯೀದ್‌ನನ್ನು ಭಾರತಕ್ಕೆ ಹಸ್ತಾಂತರಿಸಿ ಎಂದು ಮೊದಲಿನಿಂದಲೂ ಕೇಂದ್ರ ಸರ್ಕಾರ ಆಗ್ರಹಿಸುತ್ತಿದೆ. ಉಗ್ರರಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ 2019ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್‌ ಸಯೀದ್‌ನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಇದುವರೆಗೆ ಹಫೀಜ್‌ ಸಯೀದ್‌ಗೆ ವಿಧಿಸಿರುವ ಶಿಕ್ಷೆಯ ಪ್ರಮಾಣ ಯಾವುದು? ವಿಚಾರಣೆ ಯಾವ ಹಂತಕ್ಕೆ ಬಂದಿದೆ? ಆತ ಎಲ್ಲಿದ್ದಾನೆ ಎಂಬುದರ ಕುರಿತು ಪಾಕಿಸ್ತಾನ ಮಾಹಿತಿ ನೀಡಿಲ್ಲ ಎನ್ನಲಾಗುತ್ತದೆ.

ಮೂಲಗಳ ಪ್ರಕಾರ, ಹಫೀಜ್‌ ಸಯೀದ್‌ ಪಾಕಿಸ್ತಾನದ ಜೈಲಿನಲ್ಲಿಲ್ಲ. ಆತ ಅಡಗುತಾಣದಲ್ಲಿ ಸುರಕ್ಷಿತವಾಗಿದ್ದಾನೆ ಹಾಗೂ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಎನ್ನಲಾಗಿದೆ. 2020ರ ಬಳಿಕ ಉಗ್ರರಿಗೆ ಹಣಕಾಸು ನೆರವು ಸೇರಿ ಐದು ಕೃತ್ಯಗಳಲ್ಲಿ ಅಪರಾಧಿ ಎಂದು ಸಾಬೀತಾದರೂ ಆತನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.