Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮೈಸೂರಿಗೆ ತಡ ರಾತ್ರಿ ಶಾ ಆಗಮನ, ಆತ್ಮೀಯವಾಗಿ ಬರಮಾಡಿಕೊಂಡ ಬಿ.ವೈ.ವಿಜಯೇಂದ್ರ

ಮೈಸೂರು: ಒಂದು ದಿನದ ರಾಜ್ಯ ಪ್ರವಾಸದ ಭಾಗವಾಗಿ ಶನಿವಾರ ರಾತ್ರಿ 10.55ಕ್ಕೆ ಆಗಮಿಸಬೇಕಿದ್ದ ಕೇಂದ್ರ ಸಚಿವ ಅಮಿತ್ ಶಾ ಅವರು ತಡವಾಗಿ ಬೆಳಗಿನ 2.40ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ವೇಳೆಗಾಗಲೇ ವಿಮಾನ ನಿಲ್ದಾಣದಲ್ಲಿ ಹಾಜರಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು‌ಅತ್ಮೀಯವಾಗಿ ಬರಮಾಡಿಕೊಂಡರು. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಮೈಸೂರಿನ ರ್ಯಾಡಿಸನ್ ಬ್ಲ್ಯೂ ಹೊಟೆಲ್ ಗೆ ತೆರಳಿದ ಶಾ ಬಳಿಕ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದರು. ಇಂದು ಬೆಳಗ್ಗೆ 11ಗಂಟೆಯ ಸುಮಾರಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲಿರುವ ಶಾ, ಅಲ್ಲಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಸುತ್ತೂರಿಗೆ ಭೇಟಿ ನೀಡಿ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುವರು. ಬಳಿಕ ಮಧ್ಯಾಹ್ನ1.30ಕ್ಕೆ ಸುತ್ತೂರು ಮಠದಲ್ಲಿ ಊಟ ಮಾಡಿ ಅಲ್ಲಿಂದ ಮೈಸೂರಿಗೆ ವಾಪಸ್ ಆಗಲಿದ್ದಾರೆ. ನಂತರ ಮಧ್ಯಾಹ್ನ 2.30 ರಿಂದ ರ್ಯಾಡಿಸನ್ ಹೋಟೆಲ್ ನಲ್ಲಿ ಆಯೋಜನೆಗೊಂಡಿರುವ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಾಹಿತಿ ಸಂಗ್ರಹಿಸಲಿದ್ದಾರೆಂದೂ ಬಿಜೆಪಿ ಆಪ್ತ ಮೂಲಗಳಿಂದ ತಿಳಿದು ಬಂದಿದೆ.