Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯಾದ್ಯಂತ 800 ಡಯಾಲೈಸರ್ ಯಂತ್ರಗಳ ಅಳವಡಿಕೆ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಒಟ್ಟು 800 ಏಕ ಬಳಕೆಯ ಡಯಾಲಿಸಿಸ್ ಸೇವೆಗೆ ನಾಳೆ ಚಾಲನೆ ದೊರೆಯಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನಸಾಮಾನ್ಯರಿಗೆ ಸೋಂಕು ರಹಿತ ಡಯಾಲಿಸಿಸ್ ಸೇವೆ ಕಲ್ಪಿಸಲು ‌ಕ್ರಮ ತೆಗೆದುಕೊಳ್ಳಲಾಗಿದೆ. ಡಯಾಲಿಸಿಸ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಆದ್ದರಿಂದ ಇಡೀ ಡಯಾಲಿಸಿಸ್‌ ವ್ಯವಸ್ಥೆಯನ್ನು ಸದೃಢಗೊಳಿಸುವ ಉದ್ದೇಶದಿಂದ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಈ ಯಂತ್ರಗಳ ಅಳವಡಿಕೆ ಕಾರ್ಯವು ಬಹುತೇಕ ಮುಗಿದಿದೆ ಎಂದು ತಿಳಿಸಿದ್ದಾರೆ.

ಸದ್ಯ ರಾಜ್ಯದಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ಏರಿಕೆ ಮಾಡಲಾಗಿದ್ದು, ಹೊಸದಾಗಿ 48 ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನ ಪ್ರಾರಂಭ ಮಾಡಲಾಗಿದೆ. ಈ ಕೇಂದ್ರಗಳಲ್ಲಿ ಡಯಾಲೈಸರ್ ಯಂತ್ರಗಳ ಅಳವಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ನಾಳೆ 475 ಏಕ ಬಳಕೆಯ ಡಯಾಲೈಸರ್‌ಗಳು ಕಾರ್ಯ ಪ್ರಾರಂಭಿಸಲಿದ್ದು, ರೋಗಿಗಳಿಗೆ ಸೋಂಕು ರಹಿತ ಡಯಾಲಿಸಿಸ್ ಸೇವೆ ಸಿಗಲಿದೆ. ಉಳಿದ ಕೇಂದ್ರಗಳಲ್ಲೂ ಒಂದು ತಿಂಗಳೊಳಗೆ ಸೇವೆ ಪ್ರಾರಂಭವಾಗಲಿದೆ. ಪ್ರತಿಯೊಂದು ಡಯಾಲಿಸಿಸ್ ಸೈಕಲ್‌ಗೆ 1,573 ರೂಪಾಯಿ ಆಗಲಿದ್ದು, ಸರ್ಕಾರವೇ ಅದರ ವೆಚ್ಚವನ್ನು ಭರಿಸುವ ಮೂಲಕ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಿದೆ. 800 ಡಯಾಲೈಸರ್‌ ಯಂತ್ರಗಳಿಂದ ವಾರ್ಷಿಕವಾಗಿ 7.20 ಲಕ್ಷ ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗುತ್ತದೆ ಎಂದು ಅವರು ತಿಳಿಸಿದರು.