Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲೋಕಸಭೆ ಚುನಾವಣೆ: ‘ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಶೀಘ್ರ’ – ಡಿಕೆಶಿ

ಹುಬ್ಬಳ್ಳಿ: ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಿಂದ ರಾಜ್ಯದ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ದವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿಕ್ರಿಯೆಯಿಸಿ ಮಾತನಾಡಿ, “ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆಗಾಗಿ ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೆ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನು ಸುವರ್ಣ ವರ್ಷಾಚರಣೆ ಕುರಿತಂತೆ ಮಾತನಾಡಿದ ಅವರು, ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ರಾಜ್ಯದ ಜನ ಹಾಗೂ ಸರ್ಕಾರಕ್ಕೆ ಈ ಸುವರ್ಣ ಹಬ್ಬ ಆಚರಿಸಲು ಒಂದು ಅವಕಾಶ ಇದೆ. ಇಡೀ ವರ್ಷ ಸಂಭ್ರಮಾಚರಣೆಗೆ ಸರ್ಕಾರ ತೀರ್ಮಾನ ಮಾಡಿದೆ.

ಕನ್ನಡ ಜ್ಯೋತಿಗೆ ನಿನ್ನೆ ಚಾಲನೆ ನೀಡಲಾಗಿದೆ. ಅದರ ಮುಂದುವರಿದ ಭಾಗವಾಗಿ ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಭುವನೇಶ್ವರಿ ಭವನ ನಿರ್ಮಾಣ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.