Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ’- ಸಿಎಂ

ಬೆಳಗಾವಿ: ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾಡಿರುವ ಆರೋಪಕ್ಕೆ ಉತ್ತರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ನಿನ್ನೆ ಸದನದ ಒಳಗೆ ಮತ್ತು ಹೊರಗ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ.ವೈ.ವಿಜಯೇಂದ್ರ,ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ ಅವರ ವಿರುದ್ದ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಈ ಪ್ರತಿಭಟನಾ ಸಭೆಯಲ್ಲಿ ಉತ್ತರ ನೀಡುತ್ತಾರೆ ಎಂದು ನಂಬಿದ್ದೇನೆ ಎಂದು ಹೇಳಿದರು.

ಬಿ.ಎಸ್. ಯಡಿಯೂರಪ್ಪನವರು ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಕಾಣಿಕೆ ನೀಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹಿಂದೆ ಆರೋಪಿಸಿದ್ದ ಬಸವನಗೌಡ ಪಾಟೀಲ್ ಯತ್ನಾಳ್, ನಿನ್ನೆ ಹೊಸ ಬಾಂಬು ಹಾಕಿದ್ದಾರೆ. ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪನವರು ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್?ಈ ಬಗ್ಗೆ ಯಡಿಯೂರಪ್ಪನವರು ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ ಎಂದು ತಿರುಗೇಟು ನೀಡಿದರು.