Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉಡುಪಿ: ಮನೆಗೆ ನುಗ್ಗಿ ಗುಂಡಿಕ್ಕಿ ಯುವಕನ ಹತ್ಯೆ..!

ಉಡುಪಿ: ವೈಯಕ್ತಿಕ ದ್ವೇಷಕ್ಕೆ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೃತ್ಯ ನಡೆದಿದೆ. ಮಾರ್ಚ್ 02ರ​​ ಶನಿವಾರ ರಾತ್ರಿ ನಡೆದ ಘಟನೆಗೆ ಉಡುಪಿ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದಾರೆ.

ಮನೆಗೆ ನುಗ್ಗಿ ಯುವಕನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ. ಕೃಷ್ಣ (36) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ಹನೆಹಳ್ಳಿಯಲ್ಲಿ ಮೃತ ಕೃಷ್ಣ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದನು ಆತ ಮಣಿಪಾಲದಲ್ಲಿ ಕೆಲಸ ಮಾಡುತ್ತಿದ್ದನು ಎನ್ನುವ ಪ್ರಾಥಮಿಕ ಮಾಹಿತಿಯನ್ನು ಸ್ಥಳೀಯ ನಿವಾಸಿಗಳು ನೀಡಿದ್ದಾರೆ.

ಕೃಷ್ಣ ಎಂದಿನಂತೆ ಶನಿವಾರ ರಾತ್ರಿ ಮನೆಗೆ ಬಂದು ಊಟ ಮಾಡುವಾಗ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶನಿವಾರ ರಾತ್ರಿ 9:30ರ ಸುಮಾರಿಗೆ ಫೈರಿಂಗ್ ಶಬ್ದ ಕೇಳಿ ಬಂದಿದೆ. ನಾವು ಮೊದಲು ಪಟಾಕಿಯ ಶಬ್ದವೆಂದು ಸುಮ್ಮನಾದೆವು ಎಂದು ನೆರೆಹೊರೆಯವರು ತಿಳಿಸಿದ್ದಾರೆ.

ಇಂದು(ಮಾರ್ಚ್​​ 03) ಕೃಷ್ಣ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹಾಗೂ ಬ್ರಹ್ಮಾವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಬ್ರಹ್ಮಾವರ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.