ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಕೆ; ಏ. 15ಕ್ಕೆ ವಿಚಾರಣೆ

ನವದೆಹಲಿ: ಇಡಿ ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15 ರಂದು ವಿಚಾರಣೆ ನಡೆಸಲಿದೆ.

ನ್ಯಾಯಾಧೀಶರಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠದ ಮುಂದೆ ಈ ಅರ್ಜಿಯನ್ನು ಪಟ್ಟಿ ಮಾಡಲಾಗಿದೆ. ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿ ವಿಚಾರಣೆ ನಡೆಸಿದೆ. ಆ ಬಳಿಕ ನ್ಯಾಯಂಗ ಬಂಧನಕ್ಕೆ ಕೇಜ್ರಿವಾಲ್ ಅವರನ್ನು ಒಪ್ಪಿಸಿದೆ.

ಈ ಹಿಂದೆಯೂ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಬಂಧನವನ್ನು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ವರಣಾ ಕಾಂತ ಶರ್ಮಾ ಅವರು, ಇಡಿ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟು ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದರು. ಇದಾದ ಒಂದು ದಿನದ ಬಳಿಕ ಕೇಜ್ರಿವಾಲ್ ಅವರು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿ, ತಾವು ಸಲ್ಲಿಸಿರುವ ಮೇಲ್ಮನವಿಯನ್ನು ಆದಷ್ಟು ಬೇಗನೆ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಬಳಿ ಮನವಿ ಮಾಡಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾ. 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಮಾ. 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು 6 ದಿನಗಳ ಇಡಿ ಕಸ್ಟಡಿಗೆ ನೀಡಿತು. ಅದನ್ನು ಇನ್ನೂ 4 ದಿನಗಳವರೆಗೆ ಮುಂದೂಡಲಾಯಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.

Comments (0)
Add Comment