ಗಣರಾಜ್ಯೋತ್ಸ ಹಿನ್ನಲೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ನಿಗಾವಹಿಸಲು ಸೂಚನೆ

ಶ್ರೀನಗರ: ಇನ್ನೇನು ಕೆಲವೇ ದಿನಗಳಲ್ಲಿ ದೇಶದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಡೆಯಲಿದ್ದು. ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಗುಪ್ತಚರ ಸಂಸ್ಥೆಗಳಿಗೆ ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಡಿಜಿಪಿ ಆನಂದ್ ಜೈನ್‌ ಸೂಚನೆ ನೀಡಿದ್ದಾರೆ.

ಗಣರಾಜ್ಯೋತ್ಸವದ ಹಿನ್ನಲೆ ಗುಪ್ತಚರ ಸಂಸ್ಥೆಗಳು, ಭಾರತೀಯ ಸೇನೆ, ಬಿಎಸ್‌ಎಫ್, ಸಿಆರ್‌ಪಿಎಫ್ ಮತ್ತು ನಾಗರಿಕ ಆಡಳಿತದ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿತ್ತು. ಈ ಸಭೆಯಲ್ಲಿ ಗಣರಾಜ್ಯೋತ್ಸವದ ಭದ್ರತಾ ವ್ಯವಸ್ಥೆಯನ್ನು ಜೈನ್ ಅವರು ಪರೀಶಿಲನೆ ನಡೆಸಿ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಮೇಲ್ವಿಚಾರಣಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಅವರು, ಜಮ್ಮು ಹಾಗೂ ಕಾಶ್ಮೀರದ ಪ್ರದೇಶದಲ್ಲಿ ಪದೇ ಪದೇ ಭಯೋತ್ಪಾದಕರಿಂದ ದಾಳಿಗಳು ನಡೆಯುತ್ತಲೇ ಇದೆ. ದೇಶ ವಿರೋಧಿಗಳು ಎಸಗುವ ದುಷ್ಕೃತ್ಯಗಳನ್ನು ವಿಫಲಗೊಳಿಸಲು ಮತ್ತು ಗಣರಾಜ್ಯೋತ್ಸವದ ಆಚರಣೆಗಳನ್ನು ಸುಗಮವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಸಂಸ್ಥೆಗಳು ಸಮನ್ವಯತೆ ಕಾಪಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಗಣರಾಜ್ಯೋತ್ಸವದ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲಾಗುವುದು. ಜೊತೆಗೆ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ಸುತ್ತಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜೈನ್ ತಿಳಿಸಿದ್ದಾರೆ.

Comments (0)
Add Comment