ಚಿಂಚಣಿ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ಗಡಿ ಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ.

ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಇವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಸ್ವಾಮೀಜಿ ಅಗಲಿಕೆಯಿಂದಾಗಿ ಸಾವಿರಾರು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಇಂದೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಇನ್ನೂ ನೂರಾರು ಭಕ್ತರು ಮಠದತ್ತ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Comments (0)
Add Comment