‘ಜಾತಿ ಗಣತಿಗೆ ನನ್ನ ವಿರೋಧವಿಲ್ಲ’ – ಡಿಕೆಶಿ

ಬೆಂಗಳೂರು: ಜಾತಿ ಗಣತಿಗೆ ಎಲ್ಲಿಯೂ ನಾನು ವಿರೋಧ ವ್ಯಕ್ತಪಡಿಸಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಪ್ರಾಯ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ಎಂಬುದಕ್ಕೆ ಡಿಕೆಶಿ ಪ್ರತಿಕ್ರಿಯಿಸಿ, ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು ಎಂದರು.

ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದರು.

ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ಈ ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.

Comments (0)
Add Comment