ತಮಿಳುನಾಡಿಗೆ ನೀರು ವಿಚಾರ – ಇಂದು ಸರ್ವಪಕ್ಷ ತುರ್ತು ಸಭೆ ಕರೆದ ಸರ್ಕಾರ

ಬೆಂಗಳೂರು:ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇಂದು ವಿಶೇಷ ಸರ್ವಪಕ್ಷ ತುರ್ತು ಸಭೆ ಕರೆದಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ. ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಸಿಎಂಗಳಿಗೆ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ.
ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಮಾಡದಿರುವ ಸಂಬಂಧ ಸಭೆಯಲ್ಲಿ ಎಲ್ಲರೂ ಸೇರಿ ತೀರ್ಮಾನ ಮಾಡಲಿದ್ದಾರೆ. ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆರಳುವ ಬಗ್ಗೆ ದಿನ ನಿಗದಿ ಮಾಡುವ ಸಾಧ್ಯತೆ ಇದೆ.

ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ತೆರಳಲಿದ್ದು, ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Comments (0)
Add Comment